ಗಂಗಾವತಿ: ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ ಗಂಗಾವತಿಯ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದ್ದು, 6 ಆರೋಪಿಗಳಿಗೆ ಮರಣದಂಡನೆ ವಿಧಿಸಿದೆ. ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ತೀರ್ಪು ಪ್ರಕಟಿಸಿದರು.
2025ರ ಅಕ್ಟೋಬರ್ 7ರಂದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವೆಂಕಟೇಶ್ ಕುರುಬರ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಗಂಗಾವತಿ ನಗರ ಪೊಲೀಸರು 927 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದರು.

ವಿಚಾರಣೆ ಬಳಿಕ ರವಿ, ವಿಜಯ್ ಅಲಿಯಾಸ್ ಮೈಲಾರಿ, ಧನರಾಜ್, ಭೀಮ್ ಅಲಿಯಾಸ್ ಭರತ್, ಸಲೀಮ್ ಮಹಮ್ಮದ್ ರಫೀಕ್ ಹಾಗೂ ಗಂಗಾಧರ ಗೌಳಿ ಅವರನ್ನು ದೋಷಿಗಳೆಂದು ಘೋಷಿಸಿದ ನ್ಯಾಯಾಲಯ, ಮರಣದಂಡನೆ ಜೊತೆಗೆ ದಂಡ ವಿಧಿಸಿದೆ.
ಇದೇ ಪ್ರಕರಣದಲ್ಲಿ ಕಾರ್ತಿಕ್, ದಾದಪೀರ್ ಸೇರಿ ಇತರ 6 ಮಂದಿಯನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.
ತೀರ್ಪಿನ ಬಳಿಕ ನ್ಯಾಯಾಲಯದ ಹೊರಭಾಗದಲ್ಲಿ ಕುಟುಂಬಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು “ಇದು ನ್ಯಾಯದ ವಿಜಯ” ಎಂದು ಪ್ರತಿಕ್ರಿಯಿಸಿದರು.

