ಅಪರಾಧ ಸುದ್ದಿ

ರಾಜ್ಯದ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ : 300 ಕೋಟಿ ಬಿಡುಗಡೆ ಮಾಡಿದ ಸರಕಾರ

Share It

ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ 50 ರೂಪಾಯಿ ಆರ್ಥಿಕ ನೆರವಿನ ಮೊತ್ತವಾಗಿ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಕಳೆದ ನವೆಂಬರ್‌ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಟನ್‌ ಕಬ್ಬಿಗೆ ಎಫ್‌ಆರ್‌ಪಿ ಮೇಲೆ 100 ರೂ. ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು.

ಈ 100 ರೂ. ಆರ್ಥಿಕ ನೆರವಿನಲ್ಲಿ ರಾಜ್ಯ ಸರ್ಕಾರ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳು 50 ರೂ. ನೀಡಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಅದರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ 300 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆ ಆಧರಿಸಿ ಕಬ್ಬು ಅಭಿವೃದ್ಧಿ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಪ್ರತಿ ಟನ್‌ಗೆ 50 ರೂಪಾಯಿಯಂತೆ ಜಮಾ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಅದೇ ರೀತಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಪ್ರತಿ ಟನ್‌ ಕಬ್ಬಿಗೆ 50 ರೂ. ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ 81 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸಿದ್ದು, 29 ಕಾರ್ಖಾನೆಗಳಲ್ಲಿ ಕಬ್ಬು ನುರಿಸುವಿಕೆ ಮುಕ್ತಾಯವಾಗಿದೆ. ಇದುವರೆಗೆ 521 ಲಕ್ಷ ಮೆಟ್ರಿಕ್‌ ಕಬ್ಬು ನುರಿಸಲಾಗಿದ್ದು, ಈ ಹಂಗಾಮಿನಲ್ಲಿ ಸುಮಾರು 600 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ನುರಿಸುವ ನಿರೀಕ್ಷೆ ಇದೆ ಎಂದು ಸಚಿವರು ವಿವರಿಸಿದ್ದಾರೆ.

ಮಾರ್ಚ್‌ ಮೊದಲ ವಾರದ ವೇಳೆಗೆ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವಿಕೆ ಅಂತ್ಯವಾಗಲಿದೆ. 600 ಲಕ್ಷ ಮೆಟ್ರಿಕ್‌ ಟನ್‌ ನುರಿಸುವ ಅಂದಾಜು ಆಧರಿಸಿ 300 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share It

You cannot copy content of this page