ನವದೆಹಲಿ: ಕರ್ನಾಟಕ ಸೇರಿ ದೇಶದ ಹಲವು ಭಾಗಗಳಲ್ಲಿ ಆಗಸ್ಟ್ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಅದರಲ್ಲೂ, ಪೂರ್ವ ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಮತ್ತು ಛತ್ತೀಸ್ಗಢಕ್ಕೆ ಎಚ್ಚರಿಕೆ ನೀಡಲಾಗಿದೆ.
ಪೂರ್ವ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗುವುದರಿಂದ ಒಡಿಶಾ, ಜಾರ್ಖಂಡ್ ಮತ್ತು ಬಿಹಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ವಿಜ್ಞಾನಿ ಅಖಿಲ್ ಶ್ರೀವಾಸ್ತವ ಹೇಳಿದ್ದಾರೆ. “ಪಶ್ಚಿಮ-ವಾಯುವ್ಯ ದಿಕ್ಕಿಗೆ ಮಾನ್ಸೂನ್ಗಳು ಚಲಿಸುವ ನಿರೀಕ್ಷೆಯಿದೆ. ಪೂರ್ವ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಬಲವಾಗಿರುತ್ತದೆ” ಎಂದು ಹೇಳಿದರು.
ಐಎಂಡಿ ಪ್ರಕಾರ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ ಮತ್ತು ಒಡಿಶಾದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿ ಮತ್ತು ಪಕ್ಕದ ಕರಾವಳಿ ಪ್ರದೇಶಗಳಲ್ಲಿ ಆಗುತ್ತಿರುವ ವಾಯುಭಾರ ಕುಸಿತವು ಮಳೆಗೆ ಪ್ರಮುಖ ಕಾರಣವಾಗುವ ಸಾಧ್ಯತೆಯಿದೆ.
ಈ ಅವಧಿಯಲ್ಲಿ ದೆಹಲಿಯಲ್ಲಿ ಸಾಮಾನ್ಯ ಮಾನ್ಸೂನ್ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ವ್ಯಾಪಕ ಭಾರಿ ಮಳೆಯಾಗುವ ಸಾಧ್ಯತೆಯಿಲ್ಲ. ಕೆಲವು ಪ್ರದೇಶಗಳಲ್ಲಿ ಹಗುರವಾದ ಮಳೆ ಮತ್ತು ಮೋಡ ಕವಿದ ವಾತಾವರಣ ಉಂಟಾಗಬಹುದು. ಇದು ಶಾಖದಿಂದ ಸ್ವಲ್ಪ ಪರಿಹಾರ ನೀಡುತ್ತದೆ. ತಾಪಮಾನವು ಸುಮಾರು 3 ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಅಖಿಲ್ ಹೇಳಿದರು.
ಪ್ರಸ್ತುತ, ದೆಹಲಿ ತಾಪಮಾನವು ಸುಮಾರು 31 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಗರಿಷ್ಠ ತಾಪಮಾನದ ಮುನ್ಸೂಚನೆ ಸುಮಾರು 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು ಸುಮಾರು 27 ಡಿಗ್ರಿ ಸೆಲ್ಸಿಯಸ್ ಇರಲಿದೆ.

