ಹೊಳಲ್ಕೆರೆ: ಕರ್ನಾಟಕದಿಂದ ಸತತ 2 ಬಾರಿ ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಈವರೆಗೂ ಭದ್ರಾ ಮೇಲ್ದಂಡೆ ಯೋಜನೆಗೆ ಬಿಡಿಗಾಸು ನೀಡಿಲ್ಲ ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಅವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಇಂದು ಮಾತನಾಡಿ “ಕೇಂದ್ರದ ಬಿಜೆಪಿ ಸರ್ಕಾರವೇ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿತ್ತು. ಆದರೆ ಭದ್ರಾ ಮೇಲ್ದಂಡೆ ಯೋಜನೆಗೆ ನೀಡಬೇಕಾಗಿದ್ದ 5300 ಕೋಟಿ ರೂಪಾಯಿ ಅನುದಾನದಲ್ಲಿ ಈವರೆಗೂ ಬಿಡಿಗಾಸು ನೀಡದ ನಿರ್ಮಲಾ ಸೀತಾರಾಮನ್ ಮತ್ತೊಂದು ಅವಧಿಗೆ ಕೇಂದ್ರ ಸರ್ಕಾರದ ಹಣಕಾಸು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇನ್ನಾದರೂ ಬರಪೀಡಿತ ಮಧ್ಯ ಕರ್ನಾಟಕ ಪ್ರದೇಶಕ್ಕೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಡುಗಡೆ ಮಾಡಬೇಕು. ಈಗಲೂ ಯೋಜನೆಗೆ ಅಸಹಕಾರ ತೋರಿ 5300 ಕೋಟಿ ರೂಪಾಯಿ ಅನುದಾನ ಮಾಡದಿದ್ದರೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ರೈತರು ಘೇರಾವ್ ಹಾಕಲಿದ್ದಾರೆ ಎಂದು ಎಚ್.ಆಂಜನೇಯ ಅವರು ಎಚ್ಚರಿಕೆ ನೀಡಿದರು.

