ರಾಮನಗರ: “ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಬಿಜೆಪಿಯು ಐಟಿ, ಇಡಿ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ಪ್ರಯೋಗಿಸುತ್ತಿದೆ. ಈ ಪ್ರಯೋಗಗಳು ಪ್ರತಿ ಚುನಾವಣೆಯಲ್ಲೂ ನಡೆಯುತ್ತಿದ್ದು, ನಮಗೆ ಇದು ಹೊಸತಲ್ಲ” ಎಂದು ಸಂಸದರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ತಿಳಿಸಿದರು.
ರಾಮನಗರದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ಭೈರೇಗೌಡರು, ಜೆಡಿಎಸ್ ಮುಖಂಡರಾದ ರಾಜಶೇಖರ್ ಅವರ ಪಕ್ಷ ಸೇರ್ಪಡೆ ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಮಾತನಾಡಿದರು.
“ಬಿಜೆಪಿ ಅವರ ಬಳಿ ಇರುವ ಅಸ್ತ್ರ ಅದೊಂದೆ. ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಐಟಿ, ಇಡಿ, ಸಿಬಿಐ ಬಿಟ್ಟು ಅವರಿಗೆ ಬೇರೆ ಗೊತ್ತಿಲ್ಲ. ಪ್ರಧಾನಮಂತ್ರಿಗಳಿಗೆ, ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಲು ಹೇಳಿ. ಪ್ರಧಾನಮಂತ್ರಿಗಳು 10 ವರ್ಷಗಳ ಹಿಂದೆ ಹೇಳಿರುವ ಹೇಳಿಕೆ, ಕೊಟ್ಟಿರುವ ವಚನಗಳ ಬಗ್ಗೆ ಇಂದು ಅವರು ಏನು ಹೇಳುತ್ತಾರೆ ಕೇಳಿ. ಅವರಿಂದ ಶ್ರೀರಾಮನವಮಿ ದಿನ ಈ ವಿಚಾರವಾಗಿ ಸತ್ಯ ಹೇಳಿಸಿ” ಎಂದರು.
ಡಿ.ಕೆ ಸುರೇಶ್ ಅವರ ಗುರಿಯೇ ಎಂಬ ಪ್ರಶ್ನೆಗೆ, “ಅವರು ಏನಾದರೂ ಮಾಡಿ ನಮ್ಮ ನಾಯಕರನ್ನು ಕುಗ್ಗಿಸಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನಗಳು ಯಾವುದೂ ಯಶಸ್ಸಾಗುವುದಿಲ್ಲ. ಐಟಿ, ಇಡಿ, ಸಿಬಿಐ ಅಧಿಕಾರಿಗಳು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ಕಟ್ಟಿಹಾಕಿ ಸೋಲಿಸಲು ಬಂದಿದ್ದಾರೆ. ಇದು ನಮಗೆ ಹೊಸತಲ್ಲ. ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಇದೇ ತಂತ್ರ ಅನುಸರಿಸುತ್ತಿದೆ” ಎಂದರು.