ಬೆಂಗಳೂರು: ಖಾಸಗಿ ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಲಿದೆ.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ನೇತ್ರತ್ವದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದ್ದು, ಬೆಳಗ್ಗೆ 11 ಗಂಟೆಯಿಂದ ಸಂಜೆ 4.30 ರವರೆಗೆ ಪ್ರತಿಭಟನೆ ನಡೆಯಲಿದೆ. ಆಯಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಈ ಕುರಿತು ಮನವಿ ಸಲ್ಲಿಕೆ ಮಾಡಲಿದ್ದಾರೆ.
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದ್ದು, ಉದ್ಯೋಗ ನೀಡುವುದಿಲ್ಲ. ಹೀಗಾಗಿ, ಇದಕ್ಕೊಂದು ಕಡ್ಡಾಯ ಕಾನೂನು ಜಾರಿ ಮಾಡಬೇಕು. ಕನ್ನಡಿಗರಿಗೆ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸಿಗುವಂತೆ ಮಾಡಬೇಕು. ಆಗ ಮಾತ್ರ ಕನ್ನಡಿಗನ ಉದ್ಧಾರ ಸಾಧ್ಯ ಎಂಬ ಧ್ಯೇಯದೊಂದಿಗೆ ಕರವೇ ಪ್ರತಿಭಟನೆ ನಡೆಸುತ್ತಿದೆ.
ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ಈ ವೇಳೆ ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯ ಮಾಡಲು ರಕ್ಷಣಾ ವೇದಿಕೆ ತೀರ್ಮಾನಿಸಿದೆ. ಕರವೇ ಪ್ರತಿಭಟನೆಗೆ ಕೆಲವು ಕನ್ನಡಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಪ್ರಜ್ಞಾವಂತ ಕನ್ನಡಿಗರು ಸಹಕಾರ ನೀಡಲಿದ್ದಾರೆ