ಚಾಮರಾಜನಗರ: ಬೇಸಿಗೆ ರಜೆಯ ಕಾರಣದಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಾಧಿಗಳ ಸಂಖ್ಯೆ ಹೆಚ್ಚಿದ್ದು, ಹುಂಡಿಗೆ ಬರುವ ಕಾಣಿಕೆ ರೂಪದ ಹಣ 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂ. ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಸಲಾಯಿತು. ಹರಕೆಯ ರೂಪದಲ್ಲಿ 2,58,44,097 ನಗದು, 93 ಗ್ರಾಂ ಚಿನ್ನ ಹಾಗೂ 3 ಕೆಜಿ 350 ಗ್ರಾಂ ಬೆಳ್ಳಿ ವಸ್ತುಗಳು ಹುಂಡಿಯಲ್ಲಿ ಲಭ್ಯವಾಗಿದೆ.
ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಇದ್ದಿದ್ದರಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದಲ್ಲದೆ ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಕಾಣಿಕೆ ಸಂಗ್ರಹದಲ್ಲಿ ಗಣನೀಯ ಹೆಚ್ಚಳವಾಗಿದೆ ಎನ್ನಲಾಗಿದೆ.
ಹುಂಡಿಯಲ್ಲಿ ಕಾಣಿಕೆಯಲ್ಲದೆ, ಸೌದಿ ಅರೇಬಿಯಾ, ಜಪಾನ್, ನೇಪಾಳ, ಕತಾರ್ ದೇಶದ 4 ವಿದೇಶಿ ನೋಟುಗಳು, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 25 ನೋಟುಗಳು ಪತ್ತೆಯಾಗಿದೆ. ಹುಂಡಿ ಎಣಿಕೆ ಕಾರ್ಯದಲ್ಲಿ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ. ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ಇನ್ನಿತರರು ಭಾಗವಹಿಸಿದ್ದರು.
