ರಾಜಕೀಯ ಸುದ್ದಿ

ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಲಿ

Share It

ಬೆಂಗಳೂರು: “ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಶನಿವಾರ ಹೇಳಿದ್ದಿಷ್ಟು;

“ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದ್ದು, ನೀಟ್ ಅಕ್ರಮ ಗಂಭೀರ ಅಪರಾಧವಾಗಿದೆ. ಹೀಗಾಗಿ ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಲಿ ಎಂದು ಕೇಂದ್ರವನ್ನು ಮನವಿ ಮಾಡುತ್ತೇನೆ. ರಾಜ್ಯಗಳು ನಡೆಸುವ ಪರೀಕ್ಷೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಲಿ. ಅವರಿಗಾಗಿ ಮೀಸಲಾತಿಯನ್ನೂ ನೀಡಬಹುದು.

ಈ ಪರೀಕ್ಷೆಯಿಂದ ನಮ್ಮ ರಾಜ್ಯದ ಮಕ್ಕಳಿಗೆ ದೊಡ್ಡ ಅನ್ಯಾಯವಾಗುತ್ತಿವೆ. ನಾವು ಕಾಲೇಜುಗಳನ್ನು ಕಟ್ಟಿದ್ದೇವೆ. ನೀಟ್ ಪರೀಕ್ಷೆಯಿಂದ ಉತ್ತರ ಭಾರತದ ರಾಜ್ಯಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಹೀಗಾಗಿ ನಮ್ಮ ಮಕ್ಕಳಿಗೆ ತಾರತಮ್ಯವಾಗುತ್ತಿದೆ. ನಮ್ಮ ಮಕ್ಕಳಿಗೆ ನ್ಯಾಯ ಒದಗಿಸಲು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಇನ್ನು ನೀಟ್ ಅಕ್ರಮದ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಜತೆ ಚರ್ಚೆ ಮಾಡಿದ್ದೇನೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಚಾರವಾಗಿ ಉನ್ನತ ಮಟ್ಟದ ತನಿಖೆಯಾಗಿ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದರು.

ಸುಳ್ಳಿಗೆ ಮತ್ತೊಂದು ಹೆಸರೆ ಬೊಮ್ಮಾಯಿ ಎನ್ನುವಂತಾಗದಿರಲಿ:
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ಪ್ರಸ್ತಾವನೆಯೇ ಸರಿಯಾಗಿಲ್ಲ ಎಂಬ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಸುಳ್ಳಿಗೆ ಮತ್ತೊಂದು ಹೆಸರೇ ಬೊಮ್ಮಾಯಿ ಅವರು ಎನ್ನುವಂತಾಗುತ್ತಿದೆ. ಇದು ಆಗಬಾರದು. ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೇ ಭದ್ರಾ ಮೇಲ್ದಂಡೆ ಯೋಜನೆಯನ್ನು ಬಜೆಟ್ ಅಲ್ಲಿ ಅವರು ಸೇರಿಸಿಕೊಂಡರು. ನಮ್ಮ ಪ್ರಸ್ತಾವನೆ ಸರಿಯಾಗಿಲ್ಲ ಎಂದಾದರೆ ಅವರ ಬಳಿಯೇ ಹೋಗಿ ಹೇಗೆ ಬರೆಯಬೇಕು ಎಂದು ಅವರಿಂದಲೇ ಕೇಳಿ ಬರೆದು ಕೊಡುತ್ತೇವೆ.

ಬೊಮ್ಮಾಯಿ ಅವರು ಸಹ ನೀರಾವರಿ ಸಚಿವರಾಗಿದ್ದವರು. ರಾಷ್ಟ್ರೀಯ ಯೋಜನೆ ಮಾಡಿ ಎಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕ್ಯಾಬಿನೆಟ್ ಮುಂದೆ ಇಟ್ಟುಕೊಂಡರೇ ಹೊರತು ಬೇಕಂತಲೇ ಕೇಂದ್ರದಿಂದ ಹಣ ಬಿಡುಗಡೆ ಮಾಡಲಿಲ್ಲ. ಮಾಜಿ ಸಂಸದರಾದ ನಾರಾಯಣಸ್ವಾಮಿ ಅವರು ನನ್ನ ಬಳಿ ಬಂದು ರಾಷ್ಟ್ರೀಯ ಯೋಜನೆಯಾಗಲಿ ಎಂದು ಬರೆಸಿಕೊಂಡು ಹೋದರು. ಸುಮ್ಮನೆ ಏನೇನೋ ಹೇಳಬಾರದು. ಬೊಮ್ಮಾಯಿ ಅವರು ಫೇಲ್ ಆಗಿದ್ದಾರೆ” ಎಂದು ತಿಳಿಸಿದರು


Share It

You cannot copy content of this page