ವಿಜಯಪುರ: ಸತತ ಬಿಸಿಲಿನ ಬೇಗೆಗೆ ಬಸವಳಿದಿದ್ದ ರಾಜ್ಯದ ಜನತೆಗೆ ಮಳೆರಾಯ ಇಂದು ತಂಪೆರೆದಿದ್ದಾನೆ. ಇಂದು(ಏ.12) ಸಮುದ್ರ ಮಟ್ಟದಿಂದ ಸುಳಿಗಾಳಿ ಹಿನ್ನಲೆ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಅದರಂತೆ ಈ ಕೆಳಗಿನ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಸಿಡಿಲು ಬಡಿದು ಮಹಿಳೆ ಸಾವು
ವಿಜಯಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿದ್ದು, ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಅಸುನೀಗಿದ್ದಾರೆ. ತಾಂಬಾ ಗ್ರಾಮದ ನಿವಾಸಿ ಭಾರತಿ ಕೆಂಗನಾಳ(40), ಮೃತ ದುರ್ದೈವಿ. ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ನಿನ್ನೆಯಷ್ಟೇ ತಾಲೂಕಿನಲ್ಲಿ 16 ವರ್ಷದ ಬಾಲಕ ಸಿಡಿಲು ಬಡಿದು ಕೊನೆಯುಸಿರೆಳೆದಿದ್ದ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ದುರಂತ ಸಂಭವಿಸಿದೆ.
ಧಾರವಾಡ ಜಿಲ್ಲೆಯಲ್ಲಿ ಅಬ್ಬರದ ಮಳೆ; ಧರೆಗುರುಳಿದ 10 ವಿದ್ಯುತ್ ಕಂಬಗಳು!
ಧಾರವಾಡ: ಮಳೆ ಅಬ್ಬರಕ್ಕೆ 10 ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಸುಳಿಕಟ್ಟಿಯಲ್ಲಿ ನಡೆದಿದೆ. ಶಿರಸಿ-ಕಾವಲವಾಡ ಮಧ್ಯೆ ಇರುವ ಮೇನ್ ವಿದ್ಯುತ್ ಲೈನ್ ಕಂಬಗಳು ಇದಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಬಿಸಿಲಿನ ತಾಪಕ್ಕೆ ತತ್ತರಿಸಿದ ಜನಕ್ಕೆ ಮಳೆಯ ಸಿಂಚನ
ದಾವಣಗೆರೆ: ಜಿಲ್ಲೆಯ ಜನ ಅಕ್ಷರಶಃ ಬಿಸಿಲಿನ ಬೇಗೆಗೆ ತತ್ತರಿಸಿದ್ದರು. ಇಂದು ಬೆಳಗ್ಗೆ ದಿಢೀರ್ ವರುಣನ ಆಗಮನಕ್ಕೆ ಜನ ಸಂತಸದಲ್ಲಿ ತೇಲಿದ್ದಾರೆ. ಹೌದು, ದಾವಣಗೆರೆ ತಾಲೂಕಿನ ಹೆಬ್ಬಾಳ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗಿದ್ದು, ಗಾಳಿಗೆ ಮನೆಯ ಹೆಂಚುಗಳು ಹಾರಿ ಹೋಗಿವೆ. ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ರೈತರಲ್ಲಿ, ಸುರಿದ ಅಲ್ಪಸ್ವಲ್ಪ ಮಳೆಯಿಂದ ಮುಖದಲ್ಲಿ ಮಂದಹಾಸ ಮೂಡಿದೆ.
ಕುಂದಾನಗರಿಯಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ!
ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಸುರಿದ ಮಳೆ ಸುರಿದಿದ್ದು, ನಗರದ ಭೋವಿ ಗಲ್ಲಿಯಲ್ಲಿ ಮಳೆ ನೀರು ಮಳಿಗೆಗಳಿಗೆ ನುಗ್ಗಿದೆ. ಇದರಿಂದ ಮಳೆ ನೀರು ಮಳಿಗೆಗಳ ಒಳಗೆ ಹೋಗದಂತೆ ತಡೆಯಲು ಹರಸಾಹಸ ಪಡುವಂತಾಗಿದೆ. ಇನ್ನು ದಿಢೀರ್ ಮಳೆಯಿಂದ ವಾಹನ ಸವಾರರು ಕಂಗಾಲಾಗಿದ್ದಾರೆ.
ಮಲೆನಾಡು ಭಾಗದಲ್ಲಿಯೂ ವರುಣನ ಸಿಂಚನ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ತಾಲೂಕಿನ ಖಾಂಡ್ಯ, ಸಂಗಮೇಶ್ವರ ಪೇಟೆ, ಜೇನುಗದ್ದೆ, ಶಿರಗೋಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿರಗೋಳದಲ್ಲಿ ರಸ್ತೆಗೆ ಬೃಹತ್ ಅರಳಿ ಮರ ಬಿದ್ದಿದೆ. ಗಾಳಿಸಹಿತ ಭಾರಿ ಮಳೆ ಹಿನ್ನೆಲೆ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತವಾಗಿದೆ. ಜೊತೆಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿಯೂ ಮಳೆಯ ಆರ್ಭಟ ಜೋರಾಗಿದ್ದು, ತೀರ್ಥಹಳ್ಳಿ ತಾಲೂಕಿನ ಹಲವೆಡೆಯಲ್ಲಿ ಕಳೆದ ಅರ್ಧ ಗಂಟೆಯಿಂದ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಬೇಸಿಗೆ ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದ ವರುಣ
ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣ ಸೇರಿ ತಾಲೂಕಿನ ಹಲವೆಡೆ ಮಳೆಯಾಗಿದ್ದು, ಬೇಸಿಗೆ ಬಿಸಿಲಿನಿಂದ ಬಸವಳದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಭೂಮಿ ತಂಪಾಗಿದೆ. ಇತ್ತ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲೂ ಸತತ 15 ನಿಮಿಷಗಳ ಕಾಲ ಧಾರಾಕಾರ ಮಳೆ ಸುರಿದಿದೆ.