ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರದ ಬಗ್ಗೆ ಅಪಹಾಸ್ಯವಾಗಿ ಸನ್ನೆ ಮಾಡಿದ್ದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಮುಂದಿನ ಒಂದು ತಿಂಗಳಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ದೇವಸ್ಥಾನಕ್ಕೆ ಭೇಟಿ ನೀಡಲು ನಿರ್ದೇಶಿಸಲಾಗುವುದು ಎಂದು ತಿಳಿಸಿರುವ ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥ ಪಡಿಸಿದೆ.
ಗೋವಾದಲ್ಲಿ ನಡೆದಿದ್ದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್ಎಫ್ಐ) ಕಾಂತಾರ ಚಾಪ್ಟರ್-1 ಚಿತ್ರದ ಚಾಮುಂಡಿ ದೈವಕ್ಕೆ ಅಪಮಾನ ಮಾಡಿದ ಆರೋಪದ ಸಂಬಂಧ ದಾಖಲಾಗಿರುವ ಖಾಸಗಿ ದೂರು ಮತ್ತು ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ರಣವೀರ್ ಸಿಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಮುಂದಿನ ನಾಲ್ಕು ವಾರಗಳಲ್ಲಿ ರಣವೀರ್ ದೇವಸ್ಥಾನಕ್ಕೆ ಭೇಟಿ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗುವುದು ಎಂದು ತಿಳಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ರಣವೀರ್ ಕ್ಷಮೆಯಾಚಿಸಿರುವ ಪ್ರಮಾಣ ಪತ್ರ ಸಲ್ಲಿಸಿದ್ದೇವೆ. ದೇವಸ್ಥಾನಕ್ಕೆ ರಣವೀರ್ ಸಿಂಗ್ ಭೇಟಿ ನೀಡುತ್ತಾರೆ ಎಂದು ಹೇಳಲಾಗಿದೆ ಮತ್ತು ಯಾವುದೇ ಅಧೀಕೃತ ದಿನಾಂಕ ನಿಗಧಿ ಪಡಿಸಿಲ್ಲ . ಪೀಠವೇ ನಿರ್ದಿಷ್ಟ ದಿನ ನಿಗದಿ ಮಾಡಬಹುದು. ಅಂದು ರಣವೀರ್ ಸಿಂಗ್ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

