ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಗಳಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ , ಪವಿತ್ರಾ ಗೌಡ, ವಿನಯ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.
ಜೂನ್ 11ರಂದು ಈ ಬಂಧನ ನಡೆದಿದ್ದು, ಅಲ್ಲಿಂದ ಇಲ್ಲಿಯವರೆಗೆ ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಇಂದು (ಜೂನ್ 10) ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆಗಿದೆ. ಇದಕ್ಕೆ ದರ್ಶನ್ ಹಾಗೂ ಅವರ ಗ್ಯಾಂಗ್ ಕಾರಣ ಎನ್ನುವ ಆರೋಪ ಬಂದಿದೆ. ಹೀಗಾಗಿ ಜೂನ್ 11ರ ಮುಂಜಾನೆಯೇ ದರ್ಶನ್ ಅವರನ್ನು ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧನ ಆಯಿತು.
ಅನುಮಾನ ಇರುವ ಎಲ್ಲರನ್ನೂ ಪೊಲೀಸರು ಬಂಧಿಸಿದರು. 2ನೇ ಬಾರಿಗೆ ಪೊಲೀಸ್ ಕಸ್ಟಡಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.
ಈಗಾಗಲೇ ಪ್ರಕರಣ ಸಂಬಂಧ ದರ್ಶನ್ ಹಾಗೂ ತಂಡವನ್ನು 2 ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮಾಡಲಾಗಿದೆ. ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವಇಚ್ಛಾ ಹೇಳಿಕೆ, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯ ಕಲೆ ಹಾಕಲಾಗಿದೆ. ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಪೊಲೀಸರ ಮನವಿ ಮಾಡೋ ಸಾಧ್ಯತೆ ಇದೆ.
2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ದರ್ಶನ್ ಅವರು ಜೈಲುಪಾಲಾಗಿದ್ದರು. ಆಗ 14 ದಿನ ದರ್ಶನ್ ಸೆಂಟ್ರಲ್ ಜೈಲಿನಲ್ಲಿದ್ದರು.

