ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆ ನೀಡಿತ್ತು.
ಇದರಂತೆ ಈ ಪಂಚ ಗ್ಯಾರಂಟಿಗಳ ಆಧಾರದ ಮೇಲೆ ಭರ್ಜರಿ ಬಹುಮತದಿಂದ ರಾಜ್ಯದಲ್ಲಿ ಮತ್ತೆ ಹಿಂದಿನಂತೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮೊದಲು ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ನಿರ್ಧರಿಸಿ ಮಹಿಳೆಯರಿಗೆ ಉಚಿತ ಸಾರಿಗೆ ಬಸ್ ಪ್ರಯಾಣ, ವಿವಾಹಿತ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಮೂಲಕ ಮಾಸಿಕ 2 ಸಾವಿರ ರೂಪಾಯಿ ಹಣ ಪಡೆಯಲು ಕಾಂಗ್ರೆಸ್ ಸರ್ಕಾರ ಅವಕಾಶ ಕಲ್ಪಿಸಿತ್ತು.
ಬಳಿಕ ನಿಧಾನವಾಗಿ ಉಳಿದ 3 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಕಾಂಗ್ರೆಸ್ ಸರ್ಕಾರ ಜನಮನ್ನಣೆ ಗಳಿಸಿತು. ಆದರೆ ಇದೀಗ ಈ ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯದ SC-ST ನಿಗಮದ TCCS, TPS ಯೋಜನೆಗಳಿಗೆ ಮೀಸಲಾಗಿರಿಸಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಕೇಂದ್ರ ಪರಿಶಿಷ್ಟ ಆಯೋಗಕ್ಕೆ ಮಾಹಿತಿ ದೊರಕಿದೆ.
ಈ ಬಗ್ಗೆ ತಕ್ಷಣವೇ ಕೇಂದ್ರ ಪರಿಶಿಷ್ಟ ಆಯೋಗದ ಜಂಟಿ ಕಾರ್ಯದರ್ಶಿ ಅವರು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ನೀಡಿ 7 ದಿನಗಳ ಒಳಗೆ ಗ್ಯಾರಂಟಿ ಯೋಜನೆಗಳಿಗೆ SC-ST ಹಣ ದುರ್ಬಳಕೆ ಮಾಡಿಕೊಂಡ ಬಗ್ಗೆ ವಿವರಣೆ ನೀಡುವಂತೆ ಖಡಕ್ ಆಗಿ ಸೂಚನೆ ನೀಡಿದ್ದಾರೆ.
ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಸಂಕಷ್ಟ ಎದುರಾಗಿದೆ.
ಈಗಾಗಲೇ ತೆಲಂಗಾಣ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಖರ್ಚಿಗೆ ಮಹರ್ಷಿ ವಾಲ್ಮೀಕಿ ನಿಗಮದ 187.33 ಕೋಟಿ ರೂಪಾಯಿ ಅನುದಾನವನ್ನು ಬಳಸಿಕೊಂಡ ಆರೋಪ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದೆ.
ನಂತರ ಇದೀಗ 5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ SC-ST ವರ್ಗಗಳಿಗೆ ಮೀಸಲಾಗಿದ್ದ ಅನುದಾನವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಬಹುದೊಡ್ಡ ಹೊಡೆತ ನೀಡುವ ಸಾಧ್ಯತೆ ಹೆಚ್ಚಾಗಿದೆ.
