ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಕರೆ
ಬೆಂಗಳೂರು:
“ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು:
“ಪಂಡಿತ್ ನೆಹರು, ರಾಜಗೋಪಾಲಾಚಾರಿ, ಕೆಂಗಲ್ ಹನುಮಂತಯ್ಯ, ಬಿ.ಡಿ.ಜತ್ತಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ರಾಷ್ಟ್ರಮಟ್ಟಕ್ಕೆ ಬೆಳೆದವರು. ಸಂಘಟನೆ ಬಲಗೊಳಿಸಬೇಕು. ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಹೊಸದಾಗಿ ರಚಿಸುವ ಸಮಯ ಬಂದಿದೆ. ಮೊದಲು ಪಕ್ಷದ ಕೆಲಸ ಮಾಡಬೇಕು. ಕೇವಲ ಗುರುತಿನ ಚೀಟಿಗೋಸ್ಕರ ಬರುವವರು ಮನೆಯಲ್ಲಿಯೇ ಇರಿ. ಖಾದಿ ಬಟ್ಟೆ ಹಾಕಿಕೊಂಡು, ಕಾರು ಇಟ್ಟುಕೊಂಡು ಎಂಎಲ್ ಸಿ ಮಾಡಿ, ಅಧ್ಯಕ್ಷನನ್ನಾಗಿ ಮಾಡಿ ಎಂದರೆ ಅದು ಇಲ್ಲಿ ನಡೆಯುವುದಿಲ್ಲ. ಕೆಲಸ ಮಾಡುವವರಿಗೆ ಆದ್ಯತೆ. ನಿಮ್ಮ ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ತಂದು ನಾಯಕತ್ವಕ್ಕೆ ಬೇಡಿಕೆ ಇಡಬೇಕು. ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲು ಆಗದಿದ್ದರೆ ನಾವು ಬೇರೆಯವರನ್ನು ತಯಾರು ಮಾಡುತ್ತೇವೆ.
ನಾನು ಎಷ್ಟು ದಿನ ಅಧ್ಯಕ್ಷನಾಗಿ ಇರುತ್ತೇನೆ ಎಂಬುದು ಮುಖ್ಯವಲ್ಲ. ನಾನು ಅಧಿಕಾರ ಬಿಟ್ಟು ಹೋಗುವ ಮುನ್ನ ಪಕ್ಷದ ಸಂಘಟನೆಗೆ ಭದ್ರ ಬುನಾದಿ ಹಾಕಿಕೊಡುವ ಕೆಲಸ ಮಾಡುತ್ತೇನೆ. ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ. ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ. ನೀವೆಲ್ಲರೂ ಅದಕ್ಕೆ ಸಿದ್ಧರಾಗಬೇಕು ಎಂದರು.