ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು . ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಾಮರಾಜನಗರದ ಹಾಲಿ ಸಂಸದರಾಗಿದ್ದ ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ಪ್ರಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.
15 ದಿನಗಳ ಹಿಂದೆ ಭೇಟಿಯಾಗಿದ್ದಾಗ ರಾಜಕೀಯ ಮಾತನಾಡಿದೆವು. ರಾಜಕೀಯದಲ್ಲಿ ಸಂತೋಷದ ಕ್ಷಣ ಬಹಳ ಕಡಿಮೆ. ಹೋರಾಟ ಮಾಡುವಾಗ ಸಂತೋಷದ ಕ್ಷಣಗಳು ಕಡಿಮೆ. ಬಹಳ ವರ್ಷ ಗಳ ನಂತರ ಭೇಟಿಯಾಗಿದ್ದ ಕಾರಣ ಸಂತೋಷವಾಗಿದೆ ಎಂದು ಹೇಳಿರಬಹುದು ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಟ: ಶ್ರೀನಿವಾಸ ಪ್ರಸಾದ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿ ಅವರ ಕುಟುಂಬ ವರ್ಗದವರೊಂದಿಗೆ ಮಾತನಾಡಿದ್ದೆ.ಆದರೆ ಅಂಗಾಂಗ ವೈಫಲ್ಯದಿಂದಾಗಿ ಅವರ ನಿಧನವಾಗಿದೆ. ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. 2013 ರಲ್ಲಿ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಯಾಗಿ ಹಲವು ವರ್ಷಗಳ ಕಾಲ ಆರೋಗ್ಯವಾಗಿದ್ದರು ಎಂದರು.
ಶ್ರೀನಿವಾಸ ಪ್ರಸಾದ್ ಹಾಗೂ ನಾನು ಒಂದೇ ವಯೋಮಾನದವರು. ನೇರ ನುಡಿಯ ಶ್ರೀನಿವಾಸ್ ಪ್ರಸಾದ್ ಅವರು ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಟ ನಡೆಸಿದವರು. ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿ. ದಮನಿತರ ಧ್ವನಿಯಾಗಿ ಅಂಬೇಡ್ಕರ್ ತತ್ವಾದರ್ಶಗಳ ಹಾದಿಯಲ್ಲಿ ನಡೆದವರು. ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ ಶ್ರೀನಿವಾಸ್ ಪ್ರಸಾದ್, 50 ವರ್ಷಗಳ ರಾಜಕೀಯ ಜೀವನದಲ್ಲಿ ಸೋಲು ಹಾಗೂ ಗೆಲುವನ್ನು ಕಂಡವರು. ಕಾರಣಾಂತರಗಳಿಂದ ಇತ್ತೀಚೆಗೆ ರಾಜಕೀಯ ಚಟುವಟಿಕೆಗಳಿಂದ ದೂರವಾಗಿದ್ದರು ಎಂದರು.