ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣ ಕುಟುಂಬದ ಕುಡಿಗಳಾದ ಸೂರಜ್ ನನ್ನು ನ್ಯಾಯಾಲಯ ಏಳು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದ್ದರೆ, ಪ್ರಜ್ವಲ್ ರೇವಣ್ಣನನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಸೂರಜ್ ರೇವಣ್ಣ ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ಪ್ರಕರಣವನ್ನು ಸಿಐಡಿಗೆ ಸರಕಾರ ಒಪ್ಪಿಸಿದ್ದು, ವಿಚಾರಣೆಗಾಗಿ, ವಶಕ್ಕೆ ಪಡೆಯಲಾಗಿದೆ.
ಇನ್ನು ಪೆನ್ ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿಚಾರಣೆ ಮುಗಿದಿದ್ದು, ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಜುಲೈ 8 ರವೆರೆಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ರೇವಣ್ಣ ಕುಟುಂಬಕ್ಕೆ ಜೈಲು ಸಂಕಟ ಹೆಚ್ಚಾಗಿದ್ದು, ಈಗಾಗಲೇ ಜೈಲು ಸೇರಿದ್ದ ರೇವಣ್ಣ, ಜಾಮೀನಿನ ಮೇಲೆ ಹೊರಗಿದ್ದಾರೆ. ಭವಾನಿ ರೇವಣ್ಣಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಸೂರಜ್ ಅಸಹಜ ಲೈಂಗಿಕ ಕಿರುಕುಳದ ಆರೋಪದಲ್ಲಿ ಜೈಲು ಸೇರಿ, ಇದೀಗ ಸಿಐಡಿ ಕಸ್ಟಡಿಗೆ ನೀಡಲಾಗಿದೆ. ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗೆ ಇಡೀ ಕುಟುಂಬ ಸಂಕಷ್ಟದಲ್ಲಿದೆ.

