ಬೆಂಗಳೂರು:
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.
ನಿಗಮದ ಎಂ.ಡಿ ಪದ್ಮನಾಭ್ ಮತ್ತು ಅಕೌಂಟೆಂಟ್ ಪರಶುರಾಮ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ರಾತ್ರಿಯೇ ನಿಗಮದ ಎಂ.ಡಿ ಪದ್ಮನಾಭ್ ಅವರನ್ನು ಬೆಂಗಳೂರಿನ ಹೊರವಲಯದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಅಮಾನತುಗೊಂಡಿರುವ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಸಚಿವ ನಾಗೇಂದ್ರ ಅವರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ.
ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಎಸ್ಐಟಿ ಅಧಿಕಾರಿಗಳ ಮುಂದೆ ಸಚಿವರ ಹೆಸರು ಹೇಳಿದರೆ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ಎಸ್ಐಟಿ ಮುಂದೆ ನಿಮ್ಮ ಹೆಸರು ಪ್ರಸ್ತಾಪವಾದರೆ ರಾಜೀನಾಮೆ ಪಡೆಯುವುದಾಗಿ ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಹೀಗಾಗಿ ಸಚಿವ ಬಿ.ನಾಗೇಂದ್ರ ಅವರಿಗೆ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ತಲೆನೋವಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ನೋಟ್ ನಲ್ಲಿ ಸಚಿವ ಬಿ.ನಾಗೇಂದ್ರ ಅವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.
ಮತ್ತೊಂದೆಡೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.
