ವಕ್ಫ್ ಕಾಯ್ದೆ: ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿಗಳು ಸಲ್ಲಿಕೆ: ೧೬ಕ್ಕೆ ವಿಚಾರಣೆ ಸಾಧ್ಯತೆ
ನವದೆಹಲಿ: ಏಪ್ರಿಲ್ ೧೬ ರಂದು ವಕ್ಫ್ ಕಾಯ್ದೆ ೨೦೨೫ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಅರ್ಜಿಗಳನ್ನು ಕೈಗೆತ್ತಿಕೊಳ್ಳಲಿದೆ. ಇಲ್ಲಿಯವರೆಗೆ, ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ೧೦ ಕ್ಕೂ ಹೆಚ್ಚು ಅರ್ಜಿಗಳು ದಾಖಲಾಗಿವೆ. ಎಲ್ಲಾ ಅರ್ಜಿಗಳನ್ನು ಸಿಜೆಐ ನೇತೃತ್ವದ ಪೀಠವು ವಿಚಾರಣೆಗೆ ತೆಗೆದುಕೊಳ್ಳುತ್ತದೆ.
ಇದರ ಮಧ್ಯೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ನಲ್ಲಿ ಕೇವಿಯಟ್ ಸಲ್ಲಿಸಿದೆ. ವಕ್ಫ್ ತಿದ್ದುಪಡಿಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾದ ಅರ್ಜಿಗಳಿಗೆ ಇದು ಕೇಂದ್ರದ ಮೊದಲ ಪ್ರತಿಕ್ರಿಯೆಯಾಗಿದೆ. ಕೇವಿಯಟ್ ಎಂದರೆ ಕೇಂದ್ರವು ಪ್ರತಿವಾದಿಯಾಗಿದ್ದು, ಕೇಂದ್ರಕ್ಕೆ ವಿಚಾರಣೆ ಅಥವಾ ನೋಟಿಸ್ ನೀಡದೇ ಸುಪ್ರೀಂ ಕೋರ್ಟ್ ಯಾವುದೇ ಆದೇಶವನ್ನು ರವಾನಿಸಬಾರದು ಎಂದು ಹೇಳುವ ಅರ್ಜಿ ಇದಾಗಿದೆ.
ಡಿಎಂಕೆ ಮತ್ತು ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್ಗಢಿ ಸೋಮವಾರ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ. ಎಐಎಂಐಎA ಅಧ್ಯಕ್ಷ ಅಸ್ಸಾವುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಅವರಲ್ಲದೇ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಜಮಿಯತ್ ಉಲಮಾ-ಇ-ಹಿಂದ್ ಕೂಡ ಹೊಸದಾಗಿ ಜಾರಿಗೆ ತಂದ ಕಾನೂನಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಡಿಎಂಕೆ ತನ್ನ ಉಪ ಪ್ರಧಾನ ಕಾರ್ಯದರ್ಶಿ ಎ ರಾಜಾ ಮೂಲಕ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ವ್ಯಾಪಕ ವಿರೋಧದ ಹೊರತಾಗಿಯೂ, ವಕ್ಫ್ ತಿದ್ದುಪಡಿ ಮಸೂದೆ ೨೦೨೫ ಅನ್ನು ಕೇಂದ್ರ ಸರ್ಕಾರವು ಜೆಪಿಸಿ ಸದಸ್ಯರು ಮತ್ತು ಇತರ ಪಾಲುದಾರರು ಎತ್ತಿದ ಆಕ್ಷೇಪಣೆಗಳನ್ನು ಸರಿಯಾಗಿ ಪರಿಗಣಿಸದೆ ಅಂಗೀಕರಿಸಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಆರೋಪಿಸಿದೆ.
೨೦೨೫ ರ ವಕ್ಫ್ ಕಾಯ್ದೆಯ ತಕ್ಷಣದ ಅನುಷ್ಠಾನವು ತಮಿಳುನಾಡಿನ ಸುಮಾರು ೫೦ ಲಕ್ಷ ಮುಸ್ಲಿಮರು ಮತ್ತು ದೇಶದ ಇತರ ಭಾಗಗಳಲ್ಲಿರುವ ೨೦ ಕೋಟಿ ಮುಸ್ಲಿಮರ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಮತ್ತು ಪೂರ್ವಾಗ್ರಹ ಪೀಡಿತವಾಗಿಸುತ್ತದೆ ಎಂದು ಡಿಎಂಕೆ ಪಕ್ಷ ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದ ಮುಂದೆ ಕೆಲವು ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಎಂ ಸಿಂಘ್ವಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ.


